ಕನ್ನಡ ಸಿನಿಮಾ ಖರೀದಿಸಿ ರಿಲೀಸ್ ಮಾಡಲು ಮುಂದಾದ ‘ಮನೀಶ್ ಅಂಡ್ ಮಿತ್ರ ಎಂಟರ್ಟೈನ್’

ಕನ್ನಡದ ಸದಭಿರುಚಿಯ ಸಿನಿಮಾಗಳನ್ನು ಖರೀದಿಸಿ, ಅವುಗಳಿಗೆ ಪ್ರಚಾರದ ಜೊತೆಗೆ ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡುವ ಸಂಸ್ಥೆಯೊಂದು ಹುಟ್ಟಿಕೊಂಡಿದೆ.

‘ಮನೀಶ್ ಅಂಡ್ ಮಿತ್ರ ಎಂಟರ್ಟೈನ್’ ಸಂಸ್ಥೆ ಕನ್ನಡ ಸಿನಿ ಜಗತ್ತಿನ ಕನ್ನಡದ ಚಿತ್ರಗಳನ್ನು ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡಲಿದೆ.

ಹಾಸ್ಯ ನಟ ಮಿತ್ರ ಅವರ ಸಾರಥ್ಯದಲ್ಲಿ ಉದ್ಯಮಿ ಮನೀಶ್ ಮೆಹ್ತಾ ಮತ್ತು ಗೆಳೆಯರು ಸೇರಿ ಮಾಡಿರುವ ಸಂಸ್ಥೆ ಇದಾಗಿದೆ. ‘ಮನೀಶ್ ಅಂಡ್ ಮಿತ್ರ ಎಂಟರ್ಟೈನ್ ‘ ಬ್ಯಾನರ್ ಮೂಲಕ ಸದಭಿರುಚಿಯ ಸಿನಿಮಾಗಳ ರೈಟ್ಸ್ , ಅವುಗಳ ವಿತರಣೆ, ರಿಲೀಸ್, ಸಿನಿಮಾ ನಿರ್ಮಾಣ ಆಗಲಿದೆ. ತಯಾರಾದ ಚಿತ್ರಗಳು, ತಯಾರಾಗದೆ ಸಮಸ್ಯೆಯಲ್ಲಿರುವ ಸಿನಿಮಾಗಳಿಗೂ ಸಾಥ್ ನೀಡುವ ಕೆಲಸ ಈ ಸಂಸ್ಥೆ ಮಾಡಲಿದೆ.

ಈ ಸಂಸ್ಥೆ ನಾಗತಿಹಳ್ಳಿ ಸಿನಿ ಕ್ರಿಯೇಷನ್ಸ್ ನಡಿ ತಯಾರಾಗಿರುವ ‘ ಡೈಮಂಡ್ ಕ್ರಾಸ್’ ಎಂಬ ಜಾಕಿಚಾನ್ ಮಾದರಿಯ ಕನ್ನಡದ ಆಕ್ಷನ್ ಸಿನಿಮಾವೊಂದರ ರೈಟ್ಸ್ ಪಡೆದು ರಿಲೀಸ್ ಮಾಡಲು ಮುಂದಾಗಿದೆ. ಇದರೊಂದಿಗೆ ಇನ್ನೂ ಹನ್ನೊಂದು ಸಿನಿಮಾಗಳ ರೈಟ್ಸ್ ಪಡೆದು ರಿಲೀಸ್ ಮಾಡುವ ತಯಾರಿಯಲ್ಲಿದೆ.

‘ಡೈಮಂಡ್ ಕ್ರಾಸ್’ ಚಿತ್ರವನ್ನು ನಾಗತಿಹಳ್ಳಿ ಅವರ ಅಕ್ಕನ ಮಗ ರಾಮ್ ದೀಪ್ ನಿರ್ದೇಶನ ಮಾಡಿದ್ದಾರೆ. ಉತ್ತರ ಕರ್ನಾಟಕದ ಪ್ರತಿಭೆ ಧ್ರುವ , ರೋಜರ್ ನಾರಾಯಣ್ ಸೇರಿದಂತೆ ಹಲವರು ಸಿನಿಮಾದಲ್ಲಿದ್ದಾರೆ.

ಈಗ ಸಿನಿಮಾ ಮಾಡಿ ರಿಲೀಸ್ ಮಾಡೋದು ಕಷ್ಟ ಸಾಧ್ಯ. ಅದರಲ್ಲೂ ಹಾಕಿದ ಬಂಡವಾಳ ಹಿಂದಕ್ಕೆ ಬಂದರೆ ಅದೇ ಗೆಲುವು. ಇಂತಹದರಲ್ಲಿ ಹೊಸಬರ ಕಂಟೆಂಟ್ ಸಿನಿಮಾಗಳು ಬಿಡುಗಡೆಗೆ, ವ್ಯಾಪಾರಕ್ಕೆ ಅಲೆದಾಡುವ ಸ್ಥಿತಿ ಇದೆ. ಅದನ್ನು ಗಮನದಲ್ಲಿಟ್ಟುಕೊಂಡು ಈ ಸಂಸ್ಥೆ ಸಿನಿಮಾಗಳ ಖರೀದಿಸಿ, ಬಿಡುಗಡೆ ಮಾಡುವ ಉದ್ದೇಶ ಹೊಂದಿದೆ. ಕನ್ನಡಕ್ಕೆ ಈ ರೀತಿಯ ಒಂದು ಫ್ಲಾಟ್ ಫಾರಂ ಕೊರತೆ ಇತ್ತು. ಅದನ್ನು ಮನೀಶ್ ಅಂಡ್ ಮಿತ್ರ ಎಂಟರ್ಟೈನ್ ಸಂಸ್ಥೆ ನೀಗಿಸುವ ಪ್ರಯತ್ನಕ್ಕೆ ಮುಂದಾಗಿದೆ.

ಸಂಸ್ಥೆಯ ಮುಖ್ಯಸ್ಥ ಮನೀಶ್ ಅವರು ಹೇಳುವಂತೆ, ಸದಭಿರುಚಿಯ ಸಿನಿಮಾಗಳನ್ನು ಖರೀದಿಸಿ, ಅವರ ಸಿನಿಮಾಗಳನ್ನು ಜನರಿಗೆ ತಲುಪಿಸುವ ಕೆಲಸ ಮಾಡಬೇಕಿದೆ. ಈ ನಿಟ್ಟಿನಲ್ಲಿ ನಮ್ಮ ಸಂಸ್ಥೆಯ ನಟ ಮಿತ್ರ ಅವರು ಸಿನಿಮಾ ವೀಕ್ಷಿಸಿ, ಅದರ ಕಂಟೆಂಟ್, ಕ್ವಾಲಿಟಿ ಪರಿಶೀಲಿಸಿ ಅದು ಚೆನ್ನಾಗಿದೆ ಎಂದು ಸರ್ಟಿಫಿಕೇಟ್ ಕೊಟ್ಟ ಬಳಿಕವೇ ಆ ಸಿನಿಮಾ ರೈಟ್ಸ್ ಇತ್ಯಾದಿ ಬಗ್ಗೆ ಅಂತಿಮಗೊಳಿಸಲಾಗುತ್ತದೆ ಎನ್ನುತ್ತಾರೆ.

ಮಿತ್ರ ಅವರ ಪ್ರಕಾರ, ಈ ವೇದಿಕೆ ಹುಟ್ಟುಹಾಕಿದ್ದೇ ಹೊಸ ಪ್ರತಿಭೆಗಳಿಗೆ. ಸಿನಿಮಾ ಮಾಡಿ ರಿಲೀಸ್ ಮಾಡಲಾಗದೆ, ವ್ಯಾಪಾರ ಮಾಡಲಾಗದೆ ಅಸಹಾಯಕರಾಗುವ ನಿರ್ಮಾಪಕರಿಗೆ ಸಾಥ್ ನೀಡಬೇಕೆಂಬ ಉದ್ದೇಶದಿಂದ ವೇದಿಕೆ ಸೃಷ್ಟಿಯಾಗಿದೆ. ಈ ವೇದಿಕೆ ಮೂಲಕ ಕನ್ನಡದ ಒಂದಷ್ಟು ಪ್ರತಿಭಾವಂತರನ್ನು ಗಟ್ಟಿಗೊಳಿಸುವ ಸಣ್ಣ ಪ್ರಯತ್ನ ನಮ್ಮದು ಎನ್ನುತ್ತಾರೆ.

ಸಿನಿಮಾ ಮಾಡೋದು ಎಷ್ಟು ಕಷ್ಟ-ಇಷ್ಟ ಅನ್ನೋದು ಅನುಭವಿಸಿದವರಿಗಷ್ಟೇ ಗೊತ್ತು. ಸಿನಿಮಾ ಮಾಡೋದು ದೊಡ್ಡದ್ದಲ್ಲ. ಅದನ್ನು ರಿಲೀಸ್ ಮಾಡಿ, ವ್ಯಾಪಾರ ವಹಿವಾಟು ನಡೆಸೋದು ಮುಖ್ಯ. ಅದೆಷ್ಟೋ ಸಿನಿಮಾಗಳು ರಿಲೀಸ್ ಅಗದೆ ಇಂದಿಗೂ ಆ ಪ್ರಯತ್ನದಲ್ಲಿವೆ. ಹಾಕಿದ ಹಣ ವಾಪಾಸ್ ಪಡೆಯೋದು ಕಷ್ಟ ಅನಿಸಿರುವ ಈ ಸಂದರ್ಭದಲ್ಲಿ ಕನ್ನಡ ಸಿನಿಮಾ ನಿರ್ಮಾಪಕ, ನಿರ್ದೇಶಕರಿಗೆ ಖುಷಿಯ ವಿಚಾರ ಈ ಸಂಸ್ಥೆಯ ಮೂಲಕ ಹೊರಬಿದ್ದಿದೆ. _____

Be the first to comment

Leave a Reply

Your email address will not be published. Required fields are marked *

Translate »
error: Content is protected !!