ಕನ್ನಡಾಭಿಮಾನವನ್ನು ಪಹಲ್ಗಾಮ್ ಘಟನೆಗೆ ತಳುಕು ಹಾಕಿದ ಆರೋಪಕ್ಕೆ ಸಂಬಂಧ ಪಟ್ಟಂತೆ ಎಫ್ಐಆರ್ ರದ್ದುಪಡಿಸುವಂತೆ ಕೋರಿ ಗಾಯಕ ಸೋನು ನಿಗಮ್ ಸಲ್ಲಿಸಿದ ಅರ್ಜಿ ವಿಚಾರಣೆ ಇಂದು ನಡೆಯಲಿದೆ.
ಬೆಂಗಳೂರಿನ ಅವಲಹಳ್ಳಿ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಶಂಕರ್ ಅಮರಣ್ಣವರ್ ಅವರ ಏಕಸದಸ್ಯ ಪೀಠದಲ್ಲಿ ಇಂದು ವಿಚಾರಣೆ ನಡೆಯಲಿದೆ. ಸೋನು ನಿಗಮ್ ಅರ್ಜಿಯಲ್ಲಿ ದೂರುದಾರ ಕರ್ನಾಟಕ ರಕ್ಷಣಾ ವೇದಿಕೆಯ (ನಾರಾಯಣಗೌಡ ಬಣ) ಬೆಂಗಳೂರು ನಗರ ಜಿಲ್ಲಾ ಘಟಕದ ಅಧ್ಯಕ್ಷ ಟಿ ಎ ಧರ್ಮರಾಜ ಮತ್ತು ರಾಜ್ಯ ಸರ್ಕಾರವನ್ನು ಪ್ರತಿವಾದಿಯನ್ನಾಗಿಸಲಾಗಿದೆ.
ಮೇ 5ರಂದು ಎಫ್ಐಆರ್ ಸಂಬಂಧ ತನಿಖೆಗೆ ಹಾಜರಾಗುವಂತೆ ಸೋನು ನಿಗಮ್ಗೆ ಅವಲಹಳ್ಳಿ ಪೊಲೀಸರು ನೋಟಿಸ್ ಜಾರಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಸೋನು ನಿಗಮ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಏಪ್ರಿಲ್ 25, 26ರಂದು ಸೋನು ನಿಗಮ್ ಅವರು ಈಸ್ಟ್ ಪಾಯಿಂಟ್ ಕಾಲೇಜ್ ಆಫ್ ಎಂಜಿನಿಯರಿಂಗ್ ಅಂಡ್ ಟೆಕ್ನಾಲಜಿಯಲ್ಲಿ ನಡೆದಿದ್ದ ಸಂಗೀತ ಕಾರ್ಯಕ್ರಮದಲ್ಲಿ ಕನ್ನಡಿಗರ ಭಾವನೆ ಕೆರಳಿಸುವ ಹೇಳಿಕೆ ನೀಡಿದ್ದಾರೆ ಎಂದು ಮೇ 2ರಂದು ದೂರು ನೀಡಲಾಗಿತ್ತು. ಇದನ್ನು ಆಧರಿಸಿ ಪೊಲೀಸರು ಮೇ 3ರಂದು ಎಫ್ಐಆರ್ ದಾಖಲಿಸಿದ್ದರು.
—-

Be the first to comment