ರಾಜ್ಯ ಸರ್ಕಾರದ ಸೂಚನೆ ಬೆನ್ನಲ್ಲೇ ಜಾಲಿವುಡ್ ಸ್ಟುಡಿಯೋಕ್ಕೆ ಬೀಗವನ್ನು ಅಧಿಕಾರಿಗಳು ತೆರೆದಿದ್ದು ಮತ್ತೆ ಬಿಗ್ ಬಾಸ್ ಶೋ ಪ್ರಾರಂಭ ಆಗಿದೆ.
ಅಧಿಕಾರಿಗಳು ಬೀಗ ತೆರೆದ ಹಿನ್ನೆಲೆಯಲ್ಲಿ ಎಲ್ಲಾ 17 ಮಂದಿ ಸ್ಪರ್ಧಿಗಳನ್ನು ಬಿಗ್ ಬಾಸ್ ಮನೆಗೆ ಕಳುಹಿಸಿ ಆಟವನ್ನು ಮತ್ತೆ ಆರಂಭಿಸಲಾಗಿದೆ.
ಕಲರ್ಸ್ ಕನ್ನಡ ವಾಹಿನಿ ಇಂದಿನ ಎಪಿಸೋಡ್ ಮೊದಲ ಪ್ರೋಮೊ ಬಿಡುಗಡೆ ಮಾಡಿ ಬಿಗ್ ಬಾಸ್ ಶೋ ಮುಂದುವರೆಯುತ್ತದೆ ಎಂದು ಹೇಳಿದೆ.
ಪ್ರೋಮೋದಲ್ಲಿ ಖಾಲಿ ಇರುವ ಬೆಡ್ ರೂಂ, ಕಿಚನ್, ಲಿವಿಂಗ್ ರೂಂ, ಹೊರಗಡೆಯ ಏರಿಯಾಗಳನ್ನು ತೋರಿಸಲಾಗಿದ್ದು, ಕೊನೆಯಲ್ಲಿ ‘ಎಂದಿನಂತೆ ಅದೇ ಸಮಯದಲ್ಲಿ, ಬಿಗ್ಬಾಸ್ ಕನ್ನಡ ರಾತ್ರಿ 9:30ಕ್ಕೆ ಪ್ರಸಾರ ಆಗಲಿದೆ ಎಂದು ತಿಳಿಸಲಾಗಿದೆ.
ರಿಯಾಲಿಟಿ ಶೋ ನಡೆಯುತ್ತಿರುವ ಜಾಲಿವುಡ್ ಸ್ಟುಡಿಯೋ ಪರಿಸರದ ನಿಯಮಗಳನ್ನು ಪಾಲಿಸಿರಲಿಲ್ಲ. ಅಂತೆಯೇ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ನೀಡಿದ ನೋಟಿಸ್ಗೆ ಪ್ರತಿಕ್ರಿಯೆ ನೀಡಿರಲಿಲ್ಲ. ಈ ಕಾರಣಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ಜಾಲಿವುಡ್ ಸ್ಟುಡಿಯೋವನ್ನು ಸೀಲ್ ಮಾಡಿದ್ದರು.
ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ಡಿ.ಕೆ. ಶಿವಕುಮಾರ್ ಅವರು, ಬಿಗ್ ಬಾಸ್ ಕಾರ್ಯಕ್ರಮದ ನಿರ್ಮಾಣ ಸಂಸ್ಥೆಯಾದ ಜಾಲಿವುಡ್ ಸ್ಟುಡಿಯೋಸ್ಗೆ ಮತ್ತೊಂದು ಅವಕಾಶ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ತಿಳಿಸಿದ್ದರು.
ಜಾಲಿವುಡ್ ಸ್ಟುಡಿಯೋಸ್ ಬೀಗ ತೆರವಿಗೆ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರಿಗೆ ನಟ, ನಿರೂಪಕ ಸುದೀಪ್ ಧನ್ಯವಾದ ತಿಳಿಸಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಕಿಚ್ಚ ಅವರು, ಸರಿಯಾದ ಸಮಯಕ್ಕೆ ಬೆಂಬಲ ನೀಡಿದ್ದಕ್ಕಾಗಿ ನಾನು ಗೌರವಾನ್ವಿತ ಡಿಕೆ ಶಿವಕುಮಾರ್ ಅವರಿಗೆ ಪ್ರಾಮಾಣಿಕವಾಗಿ ಧನ್ಯವಾದಗಳನ್ನು ಹೇಳುತ್ತೇನೆ. ಇತ್ತೀಚೆಗೆ ನಡೆದ ಅವಾಂತರದಲ್ಲಿ ಬಿಗ್ ಬಾಸ್ ಕನ್ನಡ ಭಾಗಿಯಾಗಿಲ್ಲ ಹಾಗೂ ಅದರ ಭಾಗವಾಗಿಲ್ಲ ಎಂದು ತಿಳಿಸಿದ್ದಕ್ಕಾಗಿ ಸಂಬಂಧಪಟ್ಟ ಅಧಿಕಾರಿಗಳಿಗೂ ಧನ್ಯವಾದ ಹೇಳಲು ಬಯಸುತ್ತೇನೆ.
ಹಾಗೆಯೇ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ನನ್ನ ಕರೆಗೆ ಪ್ರತಿಕ್ರಿಯಿಸಿದ್ದಾಗಿ ನಾನು ಅವರನ್ನು ಪ್ರಶಂಶಿಸುತ್ತೇನೆ. ನಲಪಾಡ್ ಅವರ ಪ್ರಯತ್ನಕ್ಕೆ ಧನ್ಯವಾದಗಳನ್ನು ಅರ್ಪಿಸುತ್ತೇನೆ. ಬಿಗ್ ಬಾಸ್ ಕನ್ನಡ 12 ಮುಂದುವರೆಯುತ್ತದೆ ಎಂದು ಹೇಳಿದ್ದಾರೆ.
ಬಿಗ್ ಬಾಸ್ ಕನ್ನಡ ಸೀಸನ್ 12 ಮುಂದುವರೆಯುವುದು ಚರ್ಚೆಗೆ ಗ್ರಾಸವಾಗಿತ್ತು.





Be the first to comment