ಪೊಲೀಸ್ ಕಂಪ್ಲೈಂಟ್

‘ಪೊಲೀಸ್ ಕಂಪ್ಲೈಂಟ್’ ಚಿತ್ರದ ಟೀಸರ್ ಮತ್ತು ಹಾಡು ಬಿಡುಗಡೆ

ಕನ್ನಡದಲ್ಲಿ ಇತ್ತೀಚಿನ ವರ್ಷಗಳಲ್ಲಿ ಮಹಿಳಾ ಪ್ರಧಾನ ಆ್ಯಕ್ಷನ್ ಚಿತ್ರಗಳ ಸಂಖ್ಯೆ ತೀರಾ ವಿರಳ ಎಂದೇ ಹೇಳಬಹುದು. ಇಂಥ ವಿರಳ ಸಿನಿಮಾಗಳ ಸಾಲಿಗೆ ಈಗೊಂದು ಹೊಸ ಸಿನಿಮಾ ಸೇರ್ಪಡೆಯಾಗುತ್ತಿದೆ. ಆ ಸಿನಿಮಾದ ಹೆಸರೇ ‘ಪೊಲೀಸ್ ಕಂಪ್ಲೈಂಟ್’. ಇತ್ತೀಚೆಗಷ್ಟೇ ‘ಮಾರ್ಕ್’ ಚಿತ್ರದಲ್ಲಿ ಕಾಣಿಸಿಕೊಂಡಿದ್ದ ನಟಿ ವರಲಕ್ಷ್ಮೀ ಶರತಕುಮಾರ್ ಹಾಗೂ ರಾಗಿಣಿ ದ್ವಿವೇದಿ ಮುಖ್ಯಭೂಮಿಕೆಯಲ್ಲಿ ಅಭಿನಯಿಸಿರುವ ‘ಪೊಲೀಸ್ ಕಂಪ್ಲೈಂಟ್’ ಚಿತ್ರದಲ್ಲಿ ನವೀನ್ ಚಂದ್ರ, ಕೃಷ್ಣ ಸಾಯಿ ನಾಯಕ ನಟರಾಗಿ ಕಾಣಿಸಿಕೊಂಡಿದ್ದಾರೆ. ಉಳಿದಂತೆ ರವಿಶಂಕರ್, ಶರತ್ ಲೋಹಿತಾಶ್ವ, ಅನಿಲ್ ರಾಜ್, ಸಪ್ತಗಿರಿ, ಪೃಥ್ವಿರಾಜ್, ಜೆಮಿನಿ ಸುರೇಶ್ ಹೀಗೆ ದೊಡ್ಡ ಕಲಾವಿದರ ತಾರಾಗಣವೇ ಚಿತ್ರದಲ್ಲಿದೆ.

ಕನ್ನಡದಲ್ಲಿ ಈ ಹಿಂದೆ ಪೂಜಾಗಾಂಧಿ ಅಭಿನಯದ ‘ಅನು’, ‘ದಂಡು’, ‘ಆಪ್ತ’ ಮೊದಲಾದ ಚಿತ್ರಗಳನ್ನು ನಿರ್ದೇಶಿಸಿದ್ದ ಸಂಜೀವ ಮೆಗೋಟಿ ‘ಪೊಲೀಸ್ ಕಂಪ್ಲೈಂಟ್’ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ‘ಎಎ.ಎಸ್.ಕೆ ಪ್ರಮೀದಾಶ್ರೀ ಫಿಲಂಸ್’ ಬ್ಯಾನರಿನಲ್ಲಿ ಈ ಚಿತ್ರ ನಿರ್ಮಾಣವಾಗಿದೆ. ಈಗಾಗಲೇ ‘ಪೊಲೀಸ್ ಕಂಪ್ಲೈಂಟ್’ ಚಿತ್ರದ ಬಹುತೇಕ ಪೋಸ್ಟ್ ಪ್ರೊಡಕ್ಷನ್ಸ್ ಕೆಲಸಗಳನ್ನು ಪೂರ್ಣಗೊಳಿಸಿರುವ ಚಿತ್ರತಂಡ, ಇತ್ತೇಚೆಗೆ ‘ಪೊಲೀಸ್ ಕಂಪ್ಲೈಂಟ್’ ಚಿತ್ರದ ಮೊದಲ ಟೀಸರ್ ಮತ್ತು ಹಾಡೊಂದನ್ನು ಬಿಡುಗಡೆ ಮಾಡಿದೆ.

‘ಪೊಲೀಸ್ ಕಂಪ್ಲೈಂಟ್’ ಚಿತ್ರದ ಟೀಸರ್ ಅನ್ನು ನಟಿ ಪ್ರೇಮಾ ಮತ್ತು ಮೊದಲ ಹಾಡನ್ನು ‘ಕನ್ನಡ ಚಲನಚಿತ್ರ ನಿರ್ದೇಶಕರ ಸಂಘ’ದ ಅಧ್ಯಕ್ಷ ಎನ್.ಆರ್.ಕೆ ವಿಶ್ವನಾಥ್ ಬಿಡುಗಡೆಗೊಳಿಸಿ ಚಿತ್ರತಂಡಕ್ಕೆ ಶುಭ ಹಾರೈಸಿದರು.

ಪೊಲೀಸ್ ಕಂಪ್ಲೈಂಟ್

ಇದೇ ವೇಳೆ ಮಾತನಾಡಿದ ಚಿತ್ರದ ನಿರ್ದೇಶಕ ಸಂಜೀವ್ ಮೆಗೋಟಿ, ‘ಸುಮಾರು ಹತ್ತು ವರ್ಷದ ನಂತರ ‘ಪೊಲೀಸ್ ಕಂಪ್ಲೈಂಟ್’ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಮತ್ತೆ ಬರುತ್ತಿರುವುದಕ್ಕೆ ಖುಷಿಯಾಗುತ್ತಿದೆ. ಇದೊಂದು ಆ್ಯಕ್ಷನ್ ಕಂ ಹಾರರ್-ಥ್ರಿಲ್ಲರ್ ಕಥಾಹಂದರದ ಸಿನಿಮಾ. ನಾನು ಮಾಡಿದ ಕರ್ಮ ಹೇಗೆ ನಮ್ಮನ್ನು ಕಾಡುತ್ತದೆ ಎಂಬ ಒಂದು ಎಳೆಯನ್ನು ಇಟ್ಟುಕೊಂಡು ಈ ಸಿನಿಮಾ ಮಾಡಿದ್ದೇವೆ. ಕನ್ನಡ ಮತ್ತು ತೆಲುಗಿನ ಸುಮಾರು 50ಕ್ಕೂ ಹೆಚ್ಚಿನ ಕಲಾವಿದರು ಈ ಸಿನಿಮಾದ ವಿವಿಧ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಕನ್ನಡ ಮತ್ತು ತೆಲುಗು ಭಾಷೆಗಳಲ್ಲಿ ಈ ಸಿನಿಮಾ ನಿರ್ಮಾಣವಾಗಿದ್ದು, ಏಕಕಾಲಕ್ಕೆ ಎರಡೂ ಭಾಷೆಗಳಲ್ಲೂ ಈ ಸಿನಿಮಾವನ್ನು ತೆರೆಗೆ ತರುವ ಯೋಜನೆಯಿದೆ’ ಎಂದರು.

‘ಪೊಲೀಸ್ ಕಂಪ್ಲೈಂಟ್’ ಚಿತ್ರದಲ್ಲಿನ ತಮ್ಮ ಪಾತ್ರದ ಬಗ್ಗೆ ಮಾತನಾಡಿದ ನಟಿ ರಾಗಿಣಿ ದ್ವಿವೇದಿ, ‘ನನ್ನ ಸಿನಿಮಾ ಕೆರಿಯರ್ ನಲ್ಲಿ ಇದೊಂದು ವಿಭಿನ್ನ ಸಿನಿಮಾ. ಇದರಲ್ಲಿ ತಾಯಿ ಮತ್ತು ಮಗುವಿನ ಸಂಬಂಧದ ಸುತ್ತ ನನ್ನ ಪಾತ್ರ ಸಾಗುತ್ತದೆ. ಆ್ಯಕ್ಷನ್, ಹಾರರ್ ಜೊತೆಗೆ ಎಮೋಶನ್ಸ್ ಕೂಡ ಸಿನಿಮಾದಲ್ಲಿದೆ. ಎಲ್ಲಾ ಥರದ ಆಡಿಯನ್ಸ್ ಗೂ ಈ ಸಿನಿಮಾ ಇಷ್ಟವಾಗಲಿದೆ’ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಚಿತ್ರದ ಬಗ್ಗೆ ಮಾತನಾಡಿದ ನಾಯಕ ನಟರಲ್ಲಿ ಒಬ್ಬರಾದ ಕೃಷ್ಣಸಾಯಿ, ‘ಇಲ್ಲಿಯವರೆಗೆ ತೆಲುಗಿನಲ್ಲಿ ಕೆಲವು ಸಿನಿಮಾಗಳಲ್ಲಿ ಅಭಿನಯಿಸಿದ್ದೇನೆ. ಕನ್ನಡದಲ್ಲಿ ನಾಯಕ ನಟನಾಗಿ ಇದು ನನಗೆ ಮೊದಲ ಸಿನಿಮಾ. ಸಿನಿಮಾಕ ಕಥೆ ಮತ್ತು ಪಾತ್ರ ತುಂಬಾ ಚೆನ್ನಾಗಿದೆ’ ಎಂದರು. ಇನ್ನು ಬಿಡುಗಡೆಯಾಗಿರುವ ‘ಪೊಲೀಸ್ ಕಂಪ್ಲೈಂಟ್’ ಚಿತ್ರದ ಮೊದಲ ಗೀತೆಗೆ ಆರೋಹಣ ಸುಧೀಂದ್ರ ಸಂಗೀತ ಸಂಯೋಜಿಸಿದ್ದು, ಬಿ. ಆರ್. ಛಾಯಾ ಈ ಗೀತೆಗೆ ಧ್ವನಿಯಾಗಿದ್ದಾರೆ. ‘ಪೊಲೀಸ್ ಕಂಪ್ಲೈಂಟ್’ ಚಿತ್ರಕ್ಕೆ ಹರೀಶ್ ಸೊಂಡೇಕೊಪ್ಪ ಛಾಯಾಗ್ರಹಣವಿದೆ. ‘ಪೊಲೀಸ್ ಕಂಪ್ಲೈಂಟ್’ ಚಿತ್ರದ ಟೀಸರ್ ಮತ್ತು ಹಾಡು ಬಿಡುಗಡೆ ವೇಳೆ ಹಾಜರಿದ್ದ ಚಿತ್ರದ ಇತರ ಪ್ರಮುಖ ಕಲಾವಿದರು, ತಂತ್ರಜ್ಞರು ಚಿತ್ರದ ಬಗ್ಗೆ ತಮ್ಮ ಅನುಭವಗಳನ್ನು ಹಂಚಿಕೊಂಡರು.

Be the first to comment

Leave a Reply

Your email address will not be published. Required fields are marked *

Translate »
error: Content is protected !!