ಕಿರುತೆರೆಯ ಜನಪ್ರಿಯ ಕಾಮಿಡಿ ಕಾರ್ಯಕ್ರಮ ‘ಮಜಾ ಭಾರತ’ ಮತ್ತು ‘ಕಾಮಿಡಿ ಕಿಲಾಡಿಗಳು’ ಮೂಲಕ ಗುರುತಿಸಿಕೊಂಡಿದ್ದ ಹಾಸ್ಯ ಕಲಾವಿದ ಸಿದ್ದಾರ್ಥ ಪರಸನೂರು ಅವರ ಮೃತದೇಹ ಮೂರು ದಿನಗಳ ಬಳಿಕ ಪತ್ತೆಯಾಗಿದ್ದುಅನುಮಾನಾಸ್ಪದ ಸಾವಿನ ಪ್ರಕರಣ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ.
ಬೀದರ್ ನ ಹುಮ್ನಾಬಾದ್ ಪಟ್ಟಣದ ಹೊರವಲಯದ ಖಾಲಿ ಜಾಗದಲ್ಲಿ ಅವರ ಮೃತದೇಹ ಪತ್ತೆಯಾಗಿದ್ದು ಪ್ರಕರಣದ ಸುತ್ತ ಅನುಮಾನ ಆವರಿಸಿದೆ. ಹುಮ್ನಾಬಾದ್ನ ಟೀಚರ್ಸ್ ಕಾಲೋನಿಯಲ್ಲಿ ವಾಸವಿದ್ದ ಸಿದ್ದಾರ್ಥ ಪರಸನೂರು ಅವರು ಮೂರು ದಿನಗಳ ಹಿಂದೆ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ.
ಮೃತದೇಹದ ಸ್ಥಿತಿ ಗಮನಿಸಿದಾಗ ಪ್ರಾಥಮಿಕ ತನಿಖೆಯಲ್ಲಿ ಕರೆಂಟ್ ಸ್ಪರ್ಶದಿಂದ ಮೃತಪಟ್ಟಿರಬಹುದೆಂಬ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ನಿಖರ ಸಾವಿನ ಕಾರಣ ಮರಣೋತ್ತರ ಪರೀಕ್ಷೆಯ ವರದಿ ಬಳಿಕ ತಿಳಿದು ಬರಲಿದೆ.
ಕಿರುತೆರೆಯಲ್ಲಿ ಹಾಸ್ಯಪ್ರತಿಭೆಯಿಂದ ಪ್ರೇಕ್ಷಕರ ಮನಗೆದ್ದಿದ್ದ ಸಿದ್ದಾರ್ಥ ಅವರ ನಿಧನದ ಸುದ್ದಿ ಅಭಿಮಾನಿಗಳಿಗೆ ತೀವ್ರ ಆಘಾತ ಉಂಟುಮಾಡಿದೆ. ಅನೇಕರು ಸಂತಾಪ ಸೂಚಿಸುತ್ತಿದ್ದು, ಪ್ರಕರಣದ ಸತ್ಯಾಂಶ ಬಹಿರಂಗಕ್ಕೆ ಆಗ್ರಹಿಸಿದ್ದಾರೆ.
—-





Be the first to comment