ಜುಲೈ 31ಕ್ಕೆ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ರಿಲೀಸ್

ಸರ್ಕಾರಿ  ಪಡಿತರ ವ್ಯವಸ್ಥೆಯ ಸುತ್ತ ಹೆಣೆಯಲಾದ ಕನ್ನಡದ  ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಸಿನಿಮಾ ಜುಲೈ 31ಕ್ಕೆ ತೆರೆಗೆ ಬರಲಿದೆ.
ಇತ್ತೀಚೆಗೆ  ಹಿರಿಯ ರಾಜಕಾರಣಿ ಎಲ್.ಆರ್. ಶಿವರಾಮೇಗೌಡ, ಹಿರಿಯ ನಿರ್ಮಾಪಕ ಸಾ.ರಾ. ಗೋವಿಂದು, ಕರ್ನಾಟಕ ಚಲನಚಿತ್ರ ಪ್ರದರ್ಶಕರ ಸಂಘದ ಅಧ್ಯಕ್ಷ ಕೆ.ವಿ. ಚಂದ್ರಶೇಖರ್, ಗಾಯಕಿ ಶಮಿತಾ ಮಲ್ನಾಡ್ ಸೇರಿದಂತೆ ಹಲವು ಗಣ್ಯರ ಸಮ್ಮುಖದಲ್ಲಿ ಟ್ರೇಲರ್ ಬಿಡುಗಡೆಯಾಯಿತು.

ಟ್ರೇಲರ್ ಬಿಡುಗಡೆ ವೇಳೆ ಮಾತನಾಡಿದ  ಎಲ್.ಆರ್. ಶಿವರಾಮೇಗೌಡ, “ಬಡವರಿಗೆ ಆಹಾರ ಭದ್ರತೆ ನೀಡುವ ಉದ್ದೇಶದಿಂದ ಜಾರಿಯಲ್ಲಿರುವ ಪಡಿತರ ವ್ಯವಸ್ಥೆಯಲ್ಲಿರುವ ದೋಷಗಳನ್ನು ಸಿನಿಮಾ ಪರಿಣಾಮಕಾರಿಯಾಗಿ ಸಮಾಜದ ಮುಂದೆ ತರುತ್ತಿದೆ. ಇಂತಹ ಸಾಮಾಜಿಕ ಕಳಕಳಿಯ ಚಿತ್ರಗಳು ಜನಜಾಗೃತಿ ಮೂಡಿಸುವ ಕೆಲಸ ಮಾಡುತ್ತವೆ” ಎಂದು ಹೇಳಿದರು.

ನಾಯಕ ನಟ ಕುಮಾರ್ ಬಂಗಾರಪ್ಪ “ದೇಶದಲ್ಲಿಯೇ ಸರ್ಕಾರಿ ನ್ಯಾಯಬೆಲೆ ಅಂಗಡಿ ಹಾಗೂ ಪಡಿತರ ವ್ಯವಸ್ಥೆಯನ್ನು ಕೇಂದ್ರಬಿಂದುವಾಗಿಸಿಕೊಂಡು ನಿರ್ಮಾಣವಾಗಿರುವ ಮೊದಲ ಸಿನಿಮಾ ಇದಾಗಿದೆ. ಮನರಂಜನೆಯ ಜೊತೆಗೆ ಸಾಮಾಜಿಕ ಸಂದೇಶವೂ ಚಿತ್ರದಲ್ಲಿದೆ” ಎಂದು ತಿಳಿಸಿದರು.

ಚಿತ್ರದಲ್ಲಿ ರಾಗಿಣಿ ದ್ವಿವೇದಿ ‘ಪಾರ್ವತಿ’ ಎಂಬ ಗ್ರಾಮೀಣ ಮಹಿಳೆಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ನವೀನ್ ಸಜ್ಜು, ದೊಡ್ಡಣ್ಣ, ಕೃಷ್ಣಪ್ಪ, ರುದ್ರೇಗೌಡ ಸೇರಿದಂತೆ ಹಲವು ಕಲಾವಿದರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

ಜಯಶಂಕರ ಟಾಕೀಸ್ ಬ್ಯಾನರ್‌ನಲ್ಲಿ ತೇಜು ಮೂರ್ತಿ ಹಾಗೂ ಪದ್ಮಾವತಿ ಚಂದ್ರಶೇಖರ್ ನಿರ್ಮಿಸಿರುವ ಚಿತ್ರಕ್ಕೆ ಸಾತ್ವಿಕ್ ಪವನ್ ಕುಮಾರ್ ನಿರ್ದೇಶನವಿದೆ. ಬಿ. ರಾಮಮೂರ್ತಿ ಕಥೆ-ಚಿತ್ರಕಥೆ-ಸಂಭಾಷಣೆ ಬರೆದಿದ್ದಾರೆ. ಅನಂತ್ ಆರ್ಯನ್ ಸಂಗೀತ ಸಂಯೋಜಿಸಿದ್ದಾರೆ.

—-

Be the first to comment

Leave a Reply

Your email address will not be published. Required fields are marked *

Translate »
error: Content is protected !!