‘ಬಿಗ್ ಬಾಸ್ ಕನ್ನಡ ಸೀಸನ್ 12’ ಖ್ಯಾತಿಯ ಕಿರುತೆರೆ ನಟ ಧ್ರುವಂತ್ ಅಲಿಯಾಸ್ ಚರಿತ್ ಬಾಳಪ್ಪ ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ವಿರುದ್ಧ ನಡೆಯುತ್ತಿರುವ ಅಶ್ಲೀಲ ಹಾಗೂ ಮಾನಹಾನಿಕಾರಕ ಟ್ರೋಲಿಂಗ್ ವಿರುದ್ಧ ದೂರು ಸಲ್ಲಿಸಿದ್ದಾರೆ.
ತಮ್ಮ ಗೌರವಕ್ಕೆ ಧಕ್ಕೆ ಉಂಟು ಮಾಡುವ ರೀತಿಯಲ್ಲಿ ನಿರಂತರ ಪೋಸ್ಟ್, ಕಾಮೆಂಟ್ ಹಾಗೂ ಬೆದರಿಕೆ ಸಂದೇಶಗಳನ್ನು ಪ್ರಕಟಿಸಲಾಗುತ್ತಿದೆ ಎಂದು ಆರೋಪಿಸಿ ಧ್ರುವಂತ್ ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆ ಹಾಗೂ ಬಸವೇಶ್ವರ ನಗರ ಸೈಬರ್ ಸೆಲ್ಗೆ ದೂರು ಸಲ್ಲಿಸಿದ್ದಾರೆ.
ಇತ್ತೀಚೆಗೆ ನೀಡಿದ್ದ ಸಂದರ್ಶನದ ಕೆಲವು ತುಣುಕುಗಳನ್ನು ತಿರುಚಿ ಅಶ್ಲೀಲವಾಗಿ ಪ್ರಸಾರ ಮಾಡಲಾಗುತ್ತಿದ್ದು, ಇದರಿಂದ ವೈಯಕ್ತಿಕ ಜೀವನದ ಜೊತೆಗೆ ವೃತ್ತಿಜೀವನಕ್ಕೂ ಗಂಭೀರ ಹಾನಿಯಾಗಿದೆ. ಕೆಲವು ಸಾಮಾಜಿಕ ಜಾಲತಾಣದ ಪೇಜ್ಗಳು ಉದ್ದೇಶಪೂರ್ವಕವಾಗಿ ತಮ್ಮ ವಿರುದ್ಧ ಅವಾಚ್ಯ, ಅಶ್ಲೀಲ ಮತ್ತು ಮಾನಹಾನಿಕಾರಕ ವಿಷಯಗಳನ್ನು ಹರಡುತ್ತಿವೆ. ನಿರ್ಮಾಪಕರು, ನಿರ್ದೇಶಕರು, ಬ್ರ್ಯಾಂಡ್ಗಳು ಹಾಗೂ ವೃತ್ತಿಪರ ವಲಯದಲ್ಲಿ ತಮ್ಮ ಬಗ್ಗೆ ತಪ್ಪು ಅಭಿಪ್ರಾಯ ಮೂಡಿಸುವ ಉದ್ದೇಶದಿಂದ ಸುಳ್ಳು ಮಾಹಿತಿ ಹರಡಲಾಗುತ್ತಿದೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಂಡು ಮುಂದಿನ ದಿನಗಳಲ್ಲಿ ಈ ರೀತಿಯ ಕಿರುಕುಳ ನಡೆಯದಂತೆ ರಕ್ಷಣೆ ನೀಡಬೇಕು ಎಂದು ಪೊಲೀಸರಿಗೆ ಮನವಿ ಮಾಡಿದ್ದಾರೆ.





Be the first to comment