ರಿಷಬ್ ಶೆಟ್ಟಿ ನಟಿಸುತ್ತಿರುವ ‘ದಿ ಪ್ರೈಡ್ ಆಫ್ ಭಾರತ್: ಛತ್ರಪತಿ ಶಿವಾಜಿ ಮಹಾರಾಜ್’ ಐತಿಹಾಸಿಕ ಚಿತ್ರದಲ್ಲಿ ಬಾಲಿವುಡ್ ನಟಿ ಭೂಮಿ ಪೆಡ್ನೇಕರ್ ರಾಣಿ ಬೆಳವಡಿ ಮಲ್ಲಮ್ಮನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಸಂದೀಪ್ ಸಿಂಗ್ ನಿರ್ದೇಶಿಸಿ, ನಿರ್ಮಿಸುತ್ತಿರುವ ಈ ಚಿತ್ರದಲ್ಲಿ ರಿಷಬ್ ಶೆಟ್ಟಿ ಛತ್ರಪತಿ ಶಿವಾಜಿ ಮಹಾರಾಜ್ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಮಹಾರಾಜ ಛತ್ರಪತಿ ಶಿವಾಜಿ ಮಹಾರಾಜರ ಸಾಹಸಗಾಥೆಯನ್ನು ಬಿಂಬಿಸುವ ಈ ಚಿತ್ರ ಎರಡು ಭಾಗಗಳಲ್ಲಿ ಮೂಡಿಬರಲಿದೆ. ಮೊದಲ ಭಾಗವು 2027ರ ಜನವರಿ 21ರಂದು ವಿಶ್ವದಾದ್ಯಂತ ಬಿಡುಗಡೆಯಾಗಲಿದೆ.
‘ಮಹಾನ್ ಮರಾಠ ರಾಜ ಛತ್ರಪತಿ ಶಿವಾಜಿ ಮಹಾರಾಜರ ಜೀವನಚರಿತ್ರೆ ಆಧರಿಸಿದ ಚಿತ್ರದ ಭಾಗವಾಗುತ್ತಿರುವುದು ನನಗೆ ಸಿಕ್ಕ ದೊಡ್ಡ ಗೌರವ. ಕರ್ನಾಟಕದ ಧೀರ ಯೋಧ ರಾಣಿ ಬೆಳವಡಿ ಮಲ್ಲಮ್ಮ ಅವರ ಪಾತ್ರವನ್ನು ದೊಡ್ಡ ಪರದೆಯ ಮೇಲೆ ಜೀವಂತಗೊಳಿಸುತ್ತಿರುವುದು ನನಗೆ ಅತ್ಯಂತ ಖುಷಿ ತಂದಿದೆ. ಇದು ನನ್ನ ವೃತ್ತಿಜೀವನದಲ್ಲೇ ಇದುವರೆಗೆ ಮಾಡದಿರುವ ಅತ್ಯಂತ ವಿಭಿನ್ನ ಪಾತ್ರ. ನನ್ನನ್ನು ಹೊಸ ಆಯಾಮದಲ್ಲಿ ಪ್ರೇಕ್ಷಕರ ಮುಂದೆ ಪರಿಚಯಿಸುತ್ತಿರುವ ಚಿತ್ರತಂಡಕ್ಕೆ ನಾನು ಕೃತಜ್ಞಳಾಗಿದ್ದೇನೆ’ ಎಂದು ಭೂಮಿ ಪೆಡ್ನೇಕರ್ ತಿಳಿಸಿದ್ದಾರೆ.
ಈ ಐತಿಹಾಸಿಕ ಚಿತ್ರಕ್ಕೆ ರಾಷ್ಟ್ರ ಪ್ರಶಸ್ತಿ ವಿಜೇತ ಸಂಗೀತ ನಿರ್ದೇಶಕ ಅಮಿತ್ ತ್ರಿವೇದಿ ಸಂಗೀತ ನೀಡುತ್ತಿದ್ದಾರೆ. ಖ್ಯಾತ ಗೀತರಚನೆಕಾರ ಪ್ರಸೂನ್ ಜೋಶಿ ಸಾಹಿತ್ಯ ರಚಿಸಲಿದ್ದಾರೆ. ರಿಷಿ ವಿರ್ಮಾನಿ ಚಿತ್ರಕಥೆ ಬರೆದಿದ್ದಾರೆ. ವರ್ಷಾಂತ್ಯದಲ್ಲಿ ಚಿತ್ರೀಕರಣ ಆರಂಭವಾಗಲಿದೆ.
—-





Be the first to comment