ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸಾಕ್ಷಿಗಳಿಗೆ ಬೆದರಿಕೆ ಹಾಕಿದ ಆರೋಪಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಆರೋಪಿ ಗೌರವ್ ಶೆಟ್ಟಿ, ದರ್ಶನ್ ಪತ್ನಿ ವಿಜಯಲಕ್ಷ್ಮಿ ದರ್ಶನ್ ಅವರೊಂದಿಗೆ ಮಂಗಳೂರಿನಲ್ಲಿ ಕಾಣಿಸಿಕೊಂಡಿರುವುದು ಚರ್ಚೆಗೆ ಕಾರಣವಾಗಿದೆ.
ಸಾಕ್ಷಿಗಳಿಗೆ ಬೆದರಿಕೆ ಹಾಕಿದ ಪ್ರಕರಣದಲ್ಲಿ ಕಾಮಾಕ್ಷಿಪಾಳ್ಯ ಪೊಲೀಸರು ಪುನೀತ್ ಎಂಬಾತನನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ಪ್ರಕರಣದಲ್ಲಿ ಗೌರವ್ ಶೆಟ್ಟಿ ಮತ್ತು ಕಿರಣ್ ರೆಡ್ಡಿ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದರು ಎನ್ನಲಾಗಿದೆ. ಪ್ರಕರಣದ ಆರೋಪಿ ಎಂದು ಪೊಲೀಸರು ಶಂಕಿಸಿರುವ ಗೌರವ್ ಶೆಟ್ಟಿ, ವಿಜಯಲಕ್ಷ್ಮಿ ದರ್ಶನ್ ಇತ್ತೀಚೆಗೆ ಮಂಗಳೂರಿಗೆ ತೆರಳಿದ್ದ ವೇಳೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಅವರನ್ನು ಹಾಗೂ ಅವರ ಗೆಳತಿಯನ್ನು ಸ್ವಾಗತಿಸಿದ್ದಾರೆ. ಬಳಿಕ ಅವರು ಮಂಗಳೂರಿನ ಶ್ರೀ ಮಂದಾರ ಧರ್ಮ ಚಾವಡಿಗೆ ತೆರಳಿದ ಸಂದರ್ಭದಲ್ಲೂ ಜೊತೆಗಿದ್ದರು ಎಂದು ತಿಳಿದು ಬಂದಿದೆ.
ಗೌರವ್ ಶೆಟ್ಟಿ ವಿಮಾನ ನಿಲ್ದಾಣದ ಹೊರಭಾಗದಲ್ಲಿ ವಿಜಯಲಕ್ಷ್ಮಿ ದರ್ಶನ್ ಅವರನ್ನು ಸ್ವಾಗತಿಸುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಸಾಕ್ಷಿಗಳಿಗೆ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬಂಧಿತ ಪುನೀತ್ ಜೊತೆಗೆ ಗೌರವ್ ಶೆಟ್ಟಿ ಮತ್ತು ಕಿರಣ್ ರೆಡ್ಡಿ ಸಂಪರ್ಕದಲ್ಲಿದ್ದರು ಎಂಬುದು ವಿಧಿವಿಜ್ಞಾನ ಪ್ರಯೋಗಾಲಯದ ವರದಿಯಿಂದ ಬೆಳಕಿಗೆ ಬಂದಿತ್ತು.
ಗೌರವ್ ಶೆಟ್ಟಿ ಸಾರ್ವಜನಿಕವಾಗಿ ವಿಜಯಲಕ್ಷ್ಮಿ ದರ್ಶನ್ ಅವರೊಂದಿಗೆ ಕಾಣಿಸಿಕೊಂಡಿರುವುದು ಕುತೂಹಲಕ್ಕೆ ಕಾರಣವಾಗಿದೆ.
—-





Be the first to comment