ಹುಲಿ ಉಗುರಿನ ಪೆಂಡೆಂಟ್ ಒಪ್ಪಿಸಿದ ಜಗ್ಗೇಶ್

ಹುಲಿ ಉಗುರಿನ ಪೆಂಡೆಂಟ್ ಹೊಂದಿರುವ ಬಗ್ಗೆ ಸಾಕಷ್ಟು ವೈರಲ್ ಆಗಿದ್ದ ಹಿರಿಯ ನಟ ಜಗ್ಗೇಶ್ ಅವರು ಈ ಲಾಕೆಟ್ ನ್ನು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ನೀಡಿರುವುದಾಗಿ ಹೇಳಿದ್ದಾರೆ.

ಬುಧವಾರ ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಜಗ್ಗೇಶ್ ಅವರ ನಿವಾಸಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಬಂದು ಶೋಧ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಲಾಕೆಟ್ ಅನ್ನು ಅರಣ್ಯಾಧಿಕಾರಿಗಳಿಗೆ ಒಪ್ಪಿಸಿರುವುದಾಗಿ ಜಗ್ಗೇಶ್ ಅವರು ತಿಳಿಸಿದ್ದಾರೆ.

‘ಕಾನೂನು ದೊಡ್ಡದು, ಅಧಿಕಾರಿಗಳು ಕೇಳಿದ ವಸ್ತು ಒಪ್ಪಿಸಲಾಗಿದೆ. ಅಮ್ಮ ನೀಡಿದ ಬಹಳ ಹಳೆಯ ಲಾಕೆಟ್ ಎಂದು ತಿಳಿಸಿರುವೆ. ಎಷ್ಟೋ ದೋಚುವ ಮನುಷ್ಯರು, ಕೊಲೆ ಪಾತಕರು, ದೇಶದ್ರೋಹಿಗಳು, ಸಮಾಜ ಘಾತುಕರಿಗಿಂತ ನನ್ನತಾಯಿ ಕಾಣಿಕೆ ಬಗ್ಗೆ ತಲೆಕೆಡಿಸಿಕೊಂಡ ದೇವರುಗಳಿಗೆ ಧನ್ಯವಾದ. ತಲೆತಗ್ಗಿಸುವ ಯಾವ ಕೆಲಸ ಮಾಡಿಲ್ಲ, ಮಾಡೋದೂ ಇಲ್ಲ, ಪಾಚ್ಕೊಳಿ’ ಎಂದು  ಜಗ್ಗೇಶ್ ಟ್ವೀಟ್ ಮಾಡಿದ್ದಾರೆ.

ಮತ್ತೊಂದು ಟ್ವೀಟ್​ನಲ್ಲಿ ‘ಒಂದು ವಿಷಯ ಅದ್ಭುತವಾಗಿ ಅರಿತೆ. ಪ್ರೀತಿಸುವವರು 1000 ಜನ ಇದ್ದರೂ ವಿಷಯವಿಲ್ಲದೆ ದ್ವೇಷ ಮಾಡುವ 100 ಜನರು ಇದ್ದೇ ಇರುತ್ತಾರೆ. ಒಂದು ವಿಷಯ ನೆನಪಿಟ್ಟುಕೊಳ್ಳಿ. ಒಳ್ಳೆಯ ಗುಣ, ನಡತೆ ಇದ್ದಾಗ ಕೊಲ್ಲೋಕೆ ಸಾವಿರಮಂದಿ ಬಂದರೂ ಕಾಯಲು ಒಬ್ಬ ಬರುತ್ತಾನೆ. ಅವನೇ ದೇವರು. ಬದುಕಲ್ಲಿ ಸಾಧ್ಯವಾದರೆ ಒಬ್ಬರಿಗೆ ಒಳ್ಳೆಯದನ್ನು ಮಾಡಿ. ಅನ್ಯರಿಗೆ ಕೆಡುಕು ಬಯಸಿ ಬಾಳಿದರೆ ನಾಶ ಎಂದು ಬರೆದಿದ್ದಾರೆ.

ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಬಂಧನದ ನಂತರ ಹುಲಿ ಉಗುರು ಧರಿಸಿದ ಚಿತ್ರರಂಗದ ನಟರಾದ ದರ್ಶನ್, ಜಗ್ಗೇಶ್, ನಿರ್ಮಾಪಕ ರಾಕ್ ಲೈನ್ ವೆಂಕಟೇಶ್, ಮುನಿರತ್ನ ಅವರ ವಿರುದ್ಧ ಕ್ರಮ ವಹಿಸಬೇಕೆಂದು ಸಾರ್ವಜನಿಕರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಅರಣ್ಯ ಅಧಿಕಾರಿಗಳು ಕ್ರಮ ತೆಗೆದುಕೊಂಡಿದ್ದಾರೆ.

”ನಾವು ನೋಟಿಸ್ ನೀಡಿದಾಗ ಜಗ್ಗೇಶ್ ಅವರ ಪತ್ನಿ ಪರಿಮಳ ಅವರು ಪೆಂಡೆಂಟ್ ನೀಡಿದ್ದಾರೆ. ಜಗ್ಗೇಶ್ ಅವರ ಪೆಂಡೆಂಟ್ ಬಗ್ಗೆ ನಮಗೆ ಖಚಿತ ಮಾಹಿತಿ ಬೇಕಾಗಿದೆ. ಇದು 40 ವರ್ಷಗಳ ಹಳೆಯದ್ದು. ಈ ಬಗ್ಗೆ ಖಚಿತ ಮಾಡಲು ಡಿಎನ್ಎ ಪರೀಕ್ಷೆಗಾಗಿ ಲ್ಯಾಬ್ ಗೆ ಕಳುಹಿಸಲಾಗುತ್ತದೆ. ಇದು ನಿಜವಾದ ಹುಲಿ ಉಗುರು ಆಗಿದ್ದರೆ ಜಗ್ಗೇಶ್ ಅವರನ್ನು ಕರೆಸಿ ವಿಚಾರಣೆ ನಡೆಸಲಾಗುತ್ತದೆ” ಎಂದು ಅರಣ್ಯ ವಲಯ ಸಂರಕ್ಷಣಾ ಅಧಿಕಾರಿ ರವೀಂದ್ರ ಅವರು ಹೇಳಿದ್ದಾರೆ.
_

Be the first to comment

Leave a Reply

Your email address will not be published. Required fields are marked *

Translate »
error: Content is protected !!