ಹೊಸ ರಾಜಕೀಯ ಪಕ್ಷ ಘೋಷಿಸಿದ ಚೇತನ್

ನಟ ಚೇತನ್ ಅಹಿಂಸಾ ‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಹೊಸ ರಾಜಕೀಯ ಪಕ್ಷ ಸ್ಥಾಪಿಸುವುದಾಗಿ ಘೋಷಿಸಿದ್ದಾರೆ.

ಚೇತನ್ ಅಹಿಂಸಾ ರಾಜ್ಯಾದ್ಯಂತ ಪ್ರವಾಸ ಕೈಗೊಂಡು ಜನರ ಮೂಲಭೂತ ಸಮಸ್ಯೆಗಳನ್ನು ಅರಿತು ಅವುಗಳ ಪರಿಹಾರಕ್ಕಾಗಿ ಜನಾಂದೋಲನ ರೂಪಿಸುವುದಾಗಿ ಹೇಳಿದ್ದಾರೆ.

‘ಭ್ರಷ್ಟಾಚಾರದ ವಿರುದ್ಧದ ಹೋರಾಟ,  ಪರಿಸರ ಸಂರಕ್ಷಣೆ ತಮ್ಮ ಹೊಸ ರಾಜಕೀಯ ಪಕ್ಷದ ಪ್ರಮುಖ ಆದ್ಯತೆಗಳಾಗಲಿವೆ.  ರಾಜ್ಯದ ವಿವಿಧ ಭಾಗಗಳಿಗೆ ಭೇಟಿ ನೀಡಿ ಜನರ ಸಮಸ್ಯೆಗಳನ್ನು ನೇರವಾಗಿ ತಿಳಿದುಕೊಂಡು ಅವುಗಳ ಆಧಾರದ ಮೇಲೆ ಹೊಸ ರಾಜಕೀಯ ಮಾದರಿಯನ್ನು ರೂಪಿಸುವ ಉದ್ದೇಶವಿದೆ. ಪರಿಸರಕ್ಕೆ ಕಡಿಮೆ ಹಾನಿಯಾಗುವ ಸೌರಶಕ್ತಿ ಸೇರಿದಂತೆ ಪರ್ಯಾಯ ವಿದ್ಯುತ್ ಉತ್ಪಾದನಾ ಮಾರ್ಗಗಳಿಗೆ ಸರ್ಕಾರ ಆದ್ಯತೆ ನೀಡಬೇಕು. ಅಭಿವೃದ್ಧಿ ಮತ್ತು ಪರಿಸರ ಸಂರಕ್ಷಣೆಯ ನಡುವೆ ಸಮತೋಲನ ಕಾಯ್ದುಕೊಳ್ಳುವ ಅಗತ್ಯವಿದೆ’ ಎಂದು ಹೇಳಿದ್ದಾರೆ.

‘ಸಾವಿರಾರು ಕೋಟಿ ರೂಪಾಯಿ ವೆಚ್ಚದ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಯಿಂದ ಪರಿಸರದ ಮೇಲೆ ದುಷ್ಪರಿಣಾಮ ಉಂಟಾಗುವ ಸಾಧ್ಯತೆಯಿದೆ . ಅಭಿವೃದ್ಧಿಯ ಹೆಸರಿನಲ್ಲಿ ಪರಿಸರಕ್ಕೆ ಹಾನಿಯಾಗುವ ಯೋಜನೆಗಳನ್ನು ಸರ್ಕಾರ ಮರುಪರಿಶೀಲಿಸಬೇಕು’ ಎಂದು ಒತ್ತಾಯಿಸಿದ್ದಾರೆ.

‘ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕ ಮತ್ತು ತಮಿಳುನಾಡಿನ ರೈತರ ಹಿತವನ್ನು ಕಾಪಾಡುವ ರೀತಿಯಲ್ಲಿ ಸೌಹಾರ್ದಯುತ ಪರಿಹಾರ ಕಂಡುಕೊಳ್ಳಬೇಕು. ಎರಡೂ ರಾಜ್ಯಗಳ ರೈತರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ವಿವಾದಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳುವ ಅಗತ್ಯವಿದೆ’ ಎಂದಿದ್ದಾರೆ.

Be the first to comment

Leave a Reply

Your email address will not be published. Required fields are marked *

Translate »
error: Content is protected !!