‘ರಂಗಿತರಂಗ’ ಖ್ಯಾತಿಯ ನಿರೂಪ್ ಭಂಡಾರಿ ಅಭಿನಯದ ಬಹುನಿರೀಕ್ಷಿತ ‘ಅತಿಕಾಯ’ ಚಿತ್ರಕ್ಕೆ ಬಹುಭಾಷಾ ನಟಿ ಸ್ವಾತಿಷ್ಟ ಕೃಷ್ಣನ್ ನಾಯಕಿಯಾಗಿ ಆಯ್ಕೆಯಾಗಿದ್ದಾರೆ.
ಮೂಲತಃ ಧಾರವಾಡದವರಾದ ಸ್ವಾತಿಷ್ಟ ಕೃಷ್ಣನ್ ಕನ್ನಡ, ತಮಿಳು ಮತ್ತು ತೆಲುಗು ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ತಮಿಳಿನ ಸವರಕತ್ತಿ, ವಿಕ್ರಮ್, ತೆಲುಗಿನ ಗುಂಡೇ ಕಥಾ ವಿಂಟಾರ ಹಾಗೂ ಕನ್ನಡದ ಒಂದು ಸರಳ ಪ್ರೇಮಕಥೆ, ರಕ್ಕಸಪುರದೋಳ್ ಸೇರಿದಂತೆ ಹಲವು ಚಿತ್ರಗಳಲ್ಲಿ ಅಭಿನಯಿಸಿರುವ ಅವರು ‘ಅತಿಕಾಯ’ ಚಿತ್ರದ ಪ್ರಮುಖ ಪಾತ್ರದ ಮೂಲಕ ಕನ್ನಡಕ್ಕೆ ಮರಳಿದ್ದಾರೆ.
ಪದೇ ಪದೇ ಮತ್ತು ನಮಕ್ ಹರಾಮ್ ಚಿತ್ರಗಳ ನಿರ್ದೇಶಕ ನಾಗರಾಜ್ ಪೀಣ್ಯ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಚಾಕೊಲೇಟ್ ಬಾಯ್ ಹಾಗೂ ಲವರ್ ಬಾಯ್ ಇಮೇಜ್ನಲ್ಲಿ ಕಾಣಿಸಿಕೊಂಡಿದ್ದ ನಿರೂಪ್ ಭಂಡಾರಿ ಈ ಚಿತ್ರದಲ್ಲಿ ರಗಡ್ ಲುಕ್ನಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಎ.ಎನ್. ಮೂವಿ ಮೇಕರ್ಸ್ ಹಾಗೂ ನಿಹಾಲ್ ಮೂವೀಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗುತ್ತಿರುವ ಈ ಚಿತ್ರವನ್ನು ಜೆ. ಮಹೇಶ್ ಕುಮಾರ್ ಅರ್ಪಿಸುತ್ತಿದ್ದಾರೆ. ಹರೀಶ್ ರಾಯ್, ದಿನೇಶ್ ಮಂಗಳೂರು, ಬಿ. ಸುರೇಶ್, ಕಾಕ್ರೋಚ್ ಸುಧೀ, ವಜ್ರಧೀರ್ ಜೈನ್, ವರ್ಧನ್ ತೀರ್ಥಹಳ್ಳಿ, ಮಹಾಂತೇಶ್, ಜಾಕ್ ಜಾಲಿ ಸೇರಿದಂತೆ ಹಲವು ಕಲಾವಿದರು ನಟಿಸಿದ್ದಾರೆ.
ಬೆಂಗಳೂರು ನಗರದ ಜನಜಂಗುಳಿ ಪ್ರದೇಶಗಳಲ್ಲಿ ಹೆಚ್ಚಿನ ಭಾಗದ ಚಿತ್ರೀಕರಣ ನಡೆಸಲಾಗಿದೆ. ಚಿತ್ರವನ್ನು ನೈಜತೆಯೊಂದಿಗೆ ಮೂಡಿಸಲು ವಿಶೇಷ ಒತ್ತು ನೀಡಲಾಗಿದೆ. ಉದಯಲೀಲ ಛಾಯಾಗ್ರಹಣ, ಶ್ರೀನಿವಾಸ್ ಪಿ. ಬಾಬು ಸಂಕಲನ, ಸಚಿನ್ ಬಸ್ರೂರು ಸಂಗೀತ ಚಿತ್ರಕ್ಕಿದೆ.
—-





Be the first to comment