ರಾಮಾಯಣದ ಬಗ್ಗೆ ನಾನು ಯಾವುದೇ ರೀತಿಯ ಅವಮಾನ ಆಗುವಂತೆ ಮಾತನಾಡಿಲ್ಲ ಎಂದು ಬಹುಭಾಷಾ ನಟ ಪ್ರಕಾಶ್ ರಾಜ್ ಅವರು ಸ್ಪಷ್ಟೀಕರಣ ನೀಡಿದ್ದಾರೆ.
ಪ್ರಕಾಶ್ ರಾಜ್ ಅವರು ರಾಮ ಮತ್ತು ರಾಮಾಯಣದ ಬಗ್ಗೆ ಅವಮಾನಕಾರಿ ಮಾತುಗಳನ್ನಾಡಿದ್ದಾರೆ ಎಂಬ ಆರೋಪ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ವಿಡಿಯೋದಲ್ಲಿ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹ ವ್ಯಕ್ತವಾಗಿತ್ತು. ದೂರು ಕೂಡಾ ದಾಖಲಾಗಿತ್ತು.
ಈ ವಿವಾದಕ್ಕೆ ಪ್ರತಿಕ್ರಿಯೆ ನೀಡಿರುವ ಪ್ರಕಾಶ್ ರಾಜ್, ಒಂದು ಸಾಹಿತ್ಯೋತ್ಸವದಲ್ಲಿ ‘ಕಲೆ ಮತ್ತು ಅದರ ಸ್ಥಿರತೆ’ ಕುರಿತ ಸಂವಾದದಲ್ಲಿ ಭಾಗವಹಿಸಿದ್ದೆ. ಆ ಸಂವಾದದಲ್ಲಿನ ಕೆಲವು ಭಾಗಗಳನ್ನು ಮಾತ್ರ ಕತ್ತರಿಸಿ ತಿರುಚಿ ಹರಡಲಾಗಿದ್ದು, ತಾನು ಯಾರ ಧರ್ಮೀಯರ ಭಾವನೆಗೂ ಧಕ್ಕೆ ತರಲು ಯತ್ನಿಸಿಲ್ಲ . ಎಲ್ಲ ಧರ್ಮಗಳನ್ನೂ ಗೌರವಿಸುವ ವ್ಯಕ್ತಿಯಾಗಿ ಯಾರನ್ನೂ ನೋಯಿಸುವ ಉದ್ದೇಶ ನನಗೆ ಇಲ್ಲ ಎಂದು ಹೇಳಿದ್ದಾರೆ.
ಧರ್ಮವನ್ನು ರಾಜಕೀಯ ಉದ್ದೇಶಗಳಿಗೆ ಬಳಸಿಕೊಳ್ಳುವುದು ತಪ್ಪು. ನನ್ನ ಪ್ರಶ್ನೆಗಳಿಗೆ ಉತ್ತರ ನೀಡಲಾಗದೆ ಕೆಲವರು ನನ್ನನ್ನು ಹಿಂದೂ ವಿರೋಧಿ ಎಂದು ಬಿಂಬಿಸಲು ಪ್ರಯತ್ನಿಸುತ್ತಿದ್ದಾರೆ. ಈ ವಿಚಾರಕ್ಕೆ ಸಮಗ್ರ ಉತ್ತರ ನೀಡುವುದಾಗಿ ಹೇಳಿದ್ದಾರೆ.
ಪ್ರಕಾಶ್ ರಾಜ್ ಹೇಳಿಕೆ ಖಂಡಿಸಿ ತಿರುಮಲ ತಿರುಪತಿ ದೇವಸ್ಥಾನ ಮಂಡಳಿ ಸದಸ್ಯ ಭಾನುಪ್ರಕಾಶ್ ರೆಡ್ಡಿ ಅವರು ಪ್ರಕಾಶ್ ರಾಜ್ ವಿರುದ್ಧ ಮಾನನಷ್ಟ ನೋಟಿಸ್ ಕಳುಹಿಸಿದ್ದಾರೆ. ಈ ಬಗ್ಗೆ ಕ್ಷಮೆ ಕೇಳದಿದ್ದರೆ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.





Be the first to comment